ಸಕಲೇಶಪುರ: ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದು ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೇರುವುದು ಖಚಿತ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದರು. ತಾಲೂಕಿನ ಖಾಸಗಿ ರೆಸಾರ್ಟ್ ಒಂದರಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಅಕಾಂಕ್ಷಿಗಳ ಕುರಿತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣ ಸಭೆಯಲ್ಲಿ ಮಾತನಾಡಿ ರಾಜ್ಯದಲ್ಲಿ ಜನ ಬಿಜೆಪಿ ದುರಾಡಳಿತದಿಂದ ಬೇಸತ್ತಿದ್ದು ಬದಲಾವಣೆ ಬಯಸಿದ್ದಾರೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ನಿಂದ ಆರೇಳು ಜಿನ ಟಿಕೇಟ್ ಆಕಾಂಕ್ಷಿಗಳಿದ್ದು ಪಕ್ಷ ಯಾರಿಗಾದರು ಟಿಕೇಟ್ ಕೊಡಲಿ ಕಾರ್ಯಕರ್ತರು ಪಕ್ಷದ ಪರವಾಗಿ ಕೆಲಸ ಮಾಡಬೇಕು, ಈ ಬಾರಿ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು ಕಾಂಗ್ರೆಸ್ ಗೆಲುವು ಸಾಧಿಸಿದರೆ ಪ್ರಮುಖವಾಗಿ ಕಾಡಾನೆ ಸಮಸ್ಯೆ ಸೇರಿದಂತೆ ಎಲ್ಲಾ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ ಎಂದರು. ಮಾಜಿ ಸಂಸದ ಹಾಗೂ ಹಾಸನ ಜಿಲ್ಲಾ ಚುನಾವಣಾ ಉಸ್ತುವಾರಿ ಧ್ರುವನಾರಾಯಣ್ ಮಾತನಾಡಿ ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ಒಟ್ಟು 6 ಜನ ಆಕಾಂಕ್ಷಿಗಳಿದ್ದು, ಪ್ರಮುಖವಾಗಿ ಮುರಳಿ ಮೋಹನ್, ಭುವನಾಕ್ಷ, ಸಣ್ಣಸ್ವಾಮಿ, ವೆಂಕಟೇಶ್, ಡಿ.ಮಲ್ಲೇಶ್ ರವರ ಹೆಸರುಗಳಿದ್ದು ಯಾರಿಗೆ ಟಿಕೇಟ್ ನೀಡುವುದೆಂಬ ನಿಟ್ಟಿನಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆಯಲಾಗುತ್ತದೆ ಎಂದರು. ಸಭೆಯಲ್ಲಿ ಮೊದಲಿಗೆ ಬೇಲೂರು, ಅರಸೀಕೆರೆ ವಿಧಾನಸಭಾ ಟಿಕೇಟ್ ಆಕಾಂಕ್ಷಿಗಳ ಅಭಿಪ್ರಾಯ ಪಡೆಯಲಾಯಿತು. ನಂತರ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಪಡೆಯಲಾಯಿತು. ಯಾವುದ ಗೊಂದಲಗಳಿಲ್ಲದ ಸಭೆ ಶಾಂತವಾಗಿ ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ಎ.ಐ.ಸಿ.ಸಿ ವೀಶ್ವರ ಜಾನ್ ರೋಜಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್, ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ, ಮಾಜಿ ಶಾಸಕ ಪುಟ್ಟೇಗೌಡ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಮುನಿಸ್ವಾಮಿ, ಮಾಜಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್, ಕಾಂಗ್ರೆಸ್ ತಾಲೂಕು ಅಧ್ಯಕ್ಷ ಹಾನುಭಾಗ್ ಭಾಸ್ಕರ್, ಆಲೂರು ತಾಲೂಕು ಅಧ್ಯಕ್ಷ ರಂಗನಾಥ್ ಹಾಗೂ ಇತರ ಮುಖಂಡರುಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿ